ಬೆಳಗಾವಿ: ಕರ್ನಾಟಕ ಮತ್ತು ಗೋವಾ ನಡುವಿನ ಮಹದಾಯಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಗೋವಾ ವಾದಕ್ಕೆ ಪ್ರತಿಯಾಗಿ ಸುಪ್ರೀಂಕೋರ್ಟ್ ಜಂಟಿ ಸಮಿತಿ ರಚಿಸಿ ಸ್ಥಳ ಪರಿಶೀಲನೆ ನಡೆಸಲು ಆದೇಶಿಸಿದೆ. ಆದರೆ, ರಾಜ್ಯಕ್ಕೆ ನ್ಯಾಯಾಂಗ ನಿಂದನೆ ಸಂಬಂಧ ಯಾವುದೇ ನೋಟಿಸ್ ಬಂದಿಲ್ಲ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ವಿವಿಧ ರಾಜ್ಯಗಳೊಂದಿಗಿನ ನದಿ ನೀರು ಹಂಚಿಕೆ ಸಂಬಂಧ ಉದ್ಭವಿಸಿರುವ ಬಿಕ್ಕಟ್ಟಿಗೆ ಪ್ರತಿಯಾಗಿ ನವದೆಹಲಿ ಪ್ರವಾಸ ಕೈಗೊಂಡಿರುವ ಸಚಿವ ರಮೇಶ್ ಜಾರಕಿಹೊಳಿ, ಸೋಮವಾರದ ಬೆಳವಣಿಗೆಗಳಿಗೆ ಪ್ರತಿಯಾಗಿ ಈ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ರಾಜ್ಯವು ಮಹದಾಯಿ ನದಿ ನೀರನ್ನು ಮಲಪ್ರಭೆಯತ್ತ ಹರಿಸಿದ್ದು, ಇದರಿಂದ ಗೋವಾಕ್ಕೆ ನೀರು ಹರಿಯುತ್ತಿಲ್ಲ ಎಂಬ ವಾದವನ್ನು ನಮ್ಮ ರಾಜ್ಯದ ಪರ ವಕೀಲರು ಸಮರ್ಥವಾಗಿ ಎದುರಿಸಿದರು ಎಂದು ಹೇಳಿದ್ದಾರೆ.
ಈ ಅರ್ಜಿ ವಿಚಾರಣೆ ವೇಳೆ ಉಭಯ ಪಕ್ಷಗಳ ವಾದ ಆಲಿಸಿದ ಸುಪ್ರೀಂಕೋರ್ಟ್ ಮೂವರು ಅರ್ಜಿದಾರರಾದ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾಗಳಿಗೆ ತಲಾ ಓರ್ವ ಸೂಪರಿಂಟೆಂಡೆಂಟ್ ಇಂಜಿನಿಯರ್ಗಳನ್ನು ನೇಮಿಸುವಂತೆ ಸೂಚನೆ ನೀಡಿದೆ. ಈ ಮೂರೂ ಮಂದಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.